`ಯಲ್ಲಾಪುರದ ಕಳಚೆಯಲ್ಲಿ ಈ ಹಿಂದೆ ಸಂಭವಿಸಿದ್ದ ಭೂ ಕುಸಿತದಿಂದ ಸಂತ್ರಸ್ಥರಾದವರಿಗೆ ಪುರ್ನವಸತಿ ಕಲ್ಪಿಸುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಶೀಘ್ರದಲ್ಲಿ ವರದಿ ನೀಡಿ’ ಎಂದು ಶಿರಸಿ ಉಪ ವಿಭಾಗಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ ನಿರ್ದೇಶನ ನೀಡಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು `ಕಳಚೆಯಲ್ಲಿ 2021 ರಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಸಂತ್ರಸ್ಥರಾದವರಿಗೆ ಸೂಕ್ತ ಪುರ್ನವಸತಿ ಕಲ್ಪಿಸುವ ಕುರಿತಂತೆ ತಹಸೀಲ್ದಾರ್ರ ಮೂಲಕ ಪರಿಶೀಲನೆ ನಡೆಸಬೇಕು. ಸಂತ್ರಸ್ಥರ ವಿವರಗಳನ್ನು ಶೀಘ್ರದಲ್ಲಿ ಸಲ್ಲಿಸಬೇಕು’ ಎಂದು ಸೂಚಿಸಿದರು. ಜೊತೆಗೆ `ಈ ಪ್ರದೇಶದಲ್ಲಿ ಭೂ ಕುಸಿತ ತಡೆಯಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಗ್ರಾಮೀಣಾಭಿವೃದ್ಧಿ ಇಲಾಖೆ, ಅರಣ್ಯ ಮತ್ತು ಕಂದಾಯ ಇಲಾಖೆಯ ಮೂಲಕ ವ್ಯಾಪಕವಾಗಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ’ ಎಂದರು.
`ಕದ್ರಾ ಬಾಳೆಮನೆಯಲ್ಲಿ ರಸ್ತೆಯಲ್ಲಿ ಸಂಭವಿಸಿರುವ ಭೂ ಕುಸಿತದಿಂದ ಕೆಪಿಸಿಗೆ ಇಂಧನ ಸಾಗಿಸಲು ತೊಂದರೆಯಾಗುತ್ತಿದೆ’ ಎಂದು ಕೆಪಿಸಿ ಅಧಿಕಾರಿಗಳು ಹೇಳಿದರು. ಜಿ.ಎಸ್.ಐ. ಅಧಿಕಾರಿಗಳನ್ನು ಸಂಪರ್ಕಿಸಿ ಅವರ ಸಲಹೆಗನುಗುಣವಾಗಿ ತಾಂತ್ರಿಕ ತಂಡ ರಚಿಸಿಕೊಂಡು ಗುಡ್ಡ ತೆರವು ಮಾಡಿ ಎಂದು ಸೂಚಿಸಿದರು. ಕಾರವಾರ ನಗರಸಭೆ ವ್ಯಾಪ್ತಿಯಲ್ಲಿನ ಚರಂಡಿಗಳನ್ನು ವ್ಯವಸ್ಥಿತ ರೀತಿಯಲ್ಲಿ ನಿರ್ವಹಣೆ ಮಾಡುವ ಮೂಲಕ ಮಳೆ ನೀರು ಸರಾಗವಾಗಿ ಹರಿಯುವಂತೆ ವ್ಯವಸ್ಥೆ ಮಾಡುವಂತೆ ಹಾಗೂ ಈ ಮಾರ್ಗದಲ್ಲಿ ಯಾವುದೇ ರೀತಿಯ ಅತಿಕ್ರಮಣವಾಗಿದ್ದಲ್ಲಿ ಕೂಡಲೇ ತೆರವುಗೊಳಿಸುವಂತೆ ಸೂಚಿಸಿದರು.ಚನಗರ ವ್ಯಾಪ್ತಿಯಲ್ಲಿನ ಅಪಾಯಕಾರಿ ಮರಗಳು ಮತ್ತು ಮರದ ಕೊಂಬೆಗಳನ್ನು ತೆರವುಗೊಳಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ರವಿಶಂಕರ್, ಯೋಗೇಶ್, ಉಪ ವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಇದ್ದರು.
