`ಉತ್ತರ ಕನ್ನಡ ಜಿಲ್ಲೆಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಅಗತ್ಯವಿರುವ ಮೂಲ ಸೌಕರ್ಯ ಒದಗಿಸುವಂತೆ ಕೈಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದ್ದಾರೆ. `ಕೈಗಾರಿಕೋದ್ಯಮಿಗಳ ವಿವಿಧ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಆದ್ಯತೆ ಪ್ರಕಾರ ಅದನ್ನು ಬಗೆಹರಿಸಬೇಕು’ ಎಂದು ಸೂಚಿಸಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಇಲಾಖೆಯ ಏಕಗವಾಕ್ಷಿ ಒಪ್ಪಿಗೆ ಸಮಿತಿ ಸಭೆ ಮತ್ತು ಕೈಗಾರಿಕಾ ಸ್ಪಂದನ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು `ದಾಂಡೇಲಿಯ ಕೈಗಾರಿಕಾ ವಸಾಹತುನಲ್ಲಿ ಹಂಚಿಕೆಯಾಗಿರುವ ನಿವೇಶನಗಳನ್ನು ನೋಂದಣಿ ಮಾಡಲು ಇರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ’ ಎಂದು ಸೂಚಿಸಿದರು. `ಒಂದು ತಿಂಗಳ ಒಳಗೆ ಕೈಗಾರಿಕೋದ್ಯಮಿಗಳಿಗೆ ನಿವೇಶನಗಳನ್ನು ನೋಂದಣಿ ಮಾಡಿ ಕೊಡಿ’ ಎಂದು ತಾಕೀತು ಮಾಡಿದರು. `ಕುಮಟಾ ಕೈಗಾರಿಕಾ ವಸಾಹತುನಲ್ಲಿ ಬೀದಿ ದೀಪಗಳ ಸಮಸ್ಯೆ ಬಗೆಹರಿಸಿ ಪ್ರತ್ಯೇಕ ಫೀಡರ್ ಅಳವಡಿಸಬೇಕು. ರಾಮನಗರ ಕೈಗಾರಿಕಾ ವಸಾಹತುನಲ್ಲಿರುವ ಘಟಕಗಳಿಗೆ ನೀರು ಪೂರೈಸುವ ಬಗ್ಗೆ ಹಾಗೂ ನಿರಂತರ ವಿದ್ಯುತ್ ಪೂರೈಕೆ ಮಾಡಲು ವಿದ್ಯುತ್ ಉಪ ಕೇಂದ್ರ ಸ್ಥಾಪನೆ ಮಾಡಬೇಕು’ ಎಂದರು.
`ಕೈಗಾರಿಕಾ ವಸಾಹತುಗಳಲ್ಲಿ ಈಗಾಗಲೇ ಹಂಚಿಕೆ ಮಾಡಲಾದ ಮಳಿಗೆಗಳಲ್ಲಿ ಇದುವರೆಗೆ ಚಟುವಟಿಕೆಯನ್ನು ಆರಂಭಿಸದೇ ಇರುವ ಘಟಕಗಳ ವಿರುದ್ದ ನಿಯಮಾನುಸಾರ ಕ್ರಮ ಕೈಗೊಂಡು ಅವುಗಳನ್ನು ಅಗತ್ಯವಿರುವವರಿಗೆ ಮರು ಹಂಚಿಕೆ ಮಾಡಬೇಕು. ಹಂಚಿಕೆಯಾಗದೇ ಬಾಕಿ ಇರುವ ಮಳಿಗೆಗಳನ್ನು ಶೀಘ್ರದಲ್ಲಿ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಿ ಎಂದರು. ಜಿಲ್ಲೆಯಲ್ಲಿ ಮುಡಗೇರಿಯಲ್ಲಿ ಹೊಸದಾಗಿ ಅಭಿವೃದ್ಧ್ದಿಪಡಿಸುತ್ತಿರುವ ಕೈಗಾರಿಕಾ ಪ್ರದೇಶಕ್ಕೆ ಸಂಬoದಿಸಿದ0ತೆ ಆದಷ್ಟು ಶೀಘ್ರದಲ್ಲಿ ಕಾಮಗಾರಿಯನ್ನು ಕೈಗೊಳ್ಳಬೇಕು’ ಎಂದರು.
ಪ್ರಧಾನಮಂತ್ರಿ ಉದ್ಯೋಗ ಸೃಜನೆ ಯೋಜನೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಅನುಮೋದನೆ ಮಾಡುವಂತೆ ತಿಳಿಸಿದ ಅವರಿ ಸಲ್ಲಿಕೆಯಾಗುವ ಪ್ರಸ್ತಾವನೆಗಳಲ್ಲಿ ಬದಲಾವಣೆಯ ಅಗತ್ಯವಿದ್ದಲ್ಲಿ ಅದನ್ನು ಅರ್ಜಿದಾರರಿಗೆ ತಿಳಿಸಿ ಸರಿಪಡಿಸಿ ಅನುಮೋದನೆ ನೀಡಿ ಎಂದರು. `ಸಣ್ಣ ಪುಟ್ಟ ಕಾರಣಗಳಿಗೆ ಅರ್ಜಿಗಳನ್ನು ತಿರಸ್ಕರಿಸಬೇಡಿ’ ಎಂದು ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು. ಅರ್ಜಿ ಸಲ್ಲಿಸುವವರಿಗೆ ತಾವು ಕೈಗೊಳ್ಳುವ ಉದ್ದೇಶಿತ ಯೋಜನೆಯ ಬಗ್ಗೆ ಪ್ರಾಸ್ತಾವಿಕ ಯೋಜನಾ ವರದಿ ಸಲ್ಲಿಸುವ ಕುರಿತಂತೆ ಸೂಕ್ತ ಮಾಹಿತಿ ನೀಡುವಂತೆ ಕೈಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಪಿಎಂ ವಿಶ್ವಕರ್ಮ ಯೋಜನೆ ಹಾಗೂ ಕೈಗಾರಿಕೋದ್ಯಮಿಗಳ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು. ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್ ಇತರರಿದ್ದರು.
Discussion about this post