ಬೀದಿ ವ್ಯಾಪಾರಿಗಳ ಮೇಲೆ ಕಾರವಾರ ನಗರಸಭೆ ದಬ್ಬಾಳಿಕೆ ನಡೆಸುತ್ತಿದ್ದು, ಇದನ್ನು ವಿರೋಧಿಸಿ ವ್ಯಾಪಾರಿಗಳು ಪ್ರತಿಭಟಿಸಿದ್ದಾರೆ. ಈ ಹಿಂದಿನ ಸ್ಥಳದಲ್ಲಿಯೇ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.
ಸೋಮವಾರ ನಗರಸಭೆಯ ಕಚೇರಿ ಮುಂದೆ ಜಮಾಯಿಸಿದ ವ್ಯಾಪಾರಿಗಳು ನಗರಸಭೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. `ಈಗಾಗಲೇ ನಗರಸಭೆ ತಮಗೆ ವ್ಯಾಪಾರಕ್ಕೆ ಅನುಮತಿ ನೀಡಿ ಶುಲ್ಕವನ್ನು ವಸೂಲಿ ಮಾಡುತ್ತಿದೆ. ಹೀಗಿರುವಾಗ ಏಕಾಏಕಿ ಅಂಗಡಿಗಳನ್ನು ತೆರವುಗೊಳಿಸಿದ್ದು ಏತಕೆ?’ ಎಂದು ಪ್ರಶ್ನಿಸಿದರು. ನಗರಸಭೆ ಸೂಚಿಸಿದ ಎಂ ಜಿ ರಸ್ತೆಯ ಈಜುಕೊಳದ ಬಳಿ ವ್ಯಾಪಾರ ನಡೆಸುವುದು ಅಸಾಧ್ಯ’ ಎಂದು ತಿಳಿಸಿದರು.
`ಕಾರವಾರದ ವ್ಯಾಪಾರಿಗಳು ಮಾತ್ರವಲ್ಲದೇ ಅಂಕೋಲಾ ತಾಲೂಕಿನ ಗ್ರಾಮೀಣ ಪ್ರದೇಶದ ಮಹಿಳೆಯರು ಇಲ್ಲಿ ಹಣ್ಣು-ತರಕಾರಿ ಮಾರಾಟ ಮಾಡಿ ವ್ಯವಹಾರ ನಡೆಸುತ್ತಿದ್ದಾರೆ. ಗಾಂಧಿ ಮಾರುಕಟ್ಟೆ, ಸವಿತಾ ವೃತ್ತ ಮತ್ತು ಶಿವಾಜಿ ವೃತ್ತದ ಬಳಿಯ ವ್ಯವಹಾರದಿಂದ ಅವರು ಜೀವನ ನಡೆಸುತ್ತಿದ್ದಾರೆ. ನಗರಸಭೆಯವರು ಇದೀಗ ಅಭಿವೃದ್ಧಿಯ ಹೆಸರಿನಲ್ಲಿ ಬಡ ಜನರನ್ನು ಒಕ್ಕಲೆಬ್ಬಿಸುವುದು ಸರಿಯಲ್ಲ’ ಎಂದು ಆಕ್ಷೇಪಿಸಿದರು.
Discussion about this post